ಅಪಭ್ರಂಶ
ಮಧ್ಯಾಹ್ನ ಆವರಿಸಲು ಇನ್ನೇನು ಒಂದೇ ತಾಸು ಬಾಕಿಯಿದ್ದರೂ ಮಾಗಿಯ ಚಳಿ ಮಾತ್ರ ಗಾಳಿಯಲ್ಲಿ ಹಾಗೆಯೇ ಅಡಗಿತ್ತು. ಫ಼ುಟ್ಪಾತಿನ ಮೇಲೆ ನಡೆಯುವಾಗ ಬಿಸಿಲಿನಿಂದ ನೆರಳೊಳಗೆ ನುಸುಳಿದಂತೆಲ್ಲ ಅರ್ಧ ಅಂಗಿ ತೊಟ್ಟ ಶ್ಯಾಮನ ಕೈ ಮೇಲಿನ ಒಡೆದ ಚರ್ಮ ಹಿಗ್ಗಿದಂತಾಗಿ ಸಣ್ಣಗೆ ಚಿಟಿ ಚಿಟಿ ಉರಿದು ಅಹಿತವುಂಟು ಮಾಡುತ್ತಿತ್ತು. ಬಸ್ ಸ್ಟಾಪ್ ಇನ್ನು ೧೦ ನಿಮಿಷಗಳ ಕಾಲ್ನಡಿಗೆಯಷ್ಟು ದೂರ. ಯಾವಾಗಲೂ ಆಫೀಸು ಮುಗಿಸಿಕೊಂಡು ಶುಕ್ರವಾರ ರಾತ್ರಿಯೇ ಬಸ್ಸು ಹತ್ತಿ ಮಧ್ಯರಾತ್ರಿಯಲ್ಲಿ ದುರ್ಗ ಸೇರಿಬಿಡುತ್ತಿದ್ದ ಶ್ಯಾಮ ಈ ಬಾರಿ ಮಾತ್ರ ಊರಿಗೆ ಹೋಗುವುದೋ ಬೇಡವೋ ಎಂಬ ದ್ವಂದ್ವದಲ್ಲೇ ಹಿಂದಿನ ಮಧ್ಯರಾತ್ರಿಯವರೆಗೂ ಒದ್ದಾಡಿ ಹಾಗೆಯೇ ನಿದ್ದೆ ಹೋಗಿದ್ದ. ಬೆಳಿಗ್ಗೆ ತಡವಾಗಿ ಎದ್ದು ಹಾಸಿಗೆಯ ಮೇಲೆ ಕೂತವನೇ ಒಂದು ದೀರ್ಘವಾದ ಉಸಿರು ತೆಗೆದುಕೊಳ್ಳುತ್ತಾ ಹೊರಟೇಬಿಡುವುದೆಂದುಕೊಂಡವನು ಸ್ನಾನ ಮುಗಿಸಿ, ತಿಂಡಿಯ ಬಗ್ಗೆ ತಲೆ ಕೆಡಿಸಿಕೊಳ್ಳದೆ ತನ್ನ ಹೆಗಲಚೀಲವನ್ನೇರಿಸಿಕೊಂಡು ಹೊರಬಿದ್ದಿದ್ದ. ಪ್ರತಿ ಬಾರಿಯೂ ದುರ್ಗಕ್ಕೆ ಹೊರಡುವಾಗ, ಶಹರದ ಧೂಳು, ಹೊಗೆ, ಒತ್ತಡಗಳ ಜಂಜಡಗಳಿಂದ ತುಸು ಕಾಲ ಬಿಡುಗಡೆ ಹೊಂದುವ ತಹತಹದಲ್ಲಿ ಹೊರಟು, ಮತ್ತೆ ಮನೆಯವರನ್ನೆಲ್ಲ ಕಂಡ ಹುರುಪಿನೊಂದಿಗೆ ನವೀಕರಣಗೊಂಡ ಯಂತ್ರದಂತಾಗಿ ಹಿಂತಿರುಗಿ ಬರುತ್ತಿದ್ದ ಶ್ಯಾಮ. ಈ ಬಾರಿ ಯಾಕೋ ಬೆಂಗಳೂರಿನ ಯಾಂತ್ರಿಕ ಬದುಕಿನೆದುರು ಅಲ್ಲಿಗೆ ಹೋಗಿ ಬರುವುದೇ ಸಪ್ಪೆಯೆನಿಸತೊಡಗಿತ್ತು ಅವನಿಗೆ. ಅಪ್ಪನಿಗೆ ವಾದಿ ಮ...